ಬೆಂಗಳೂರು:
ರಸ್ತೆ ಅಪಘಾತದಲ್ಲಿ ನಿಧನರಾದ ದಿವಂಗತ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಕುಮಾರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೇವೆಯಲ್ಲಿದ್ದ ಸಂದರ್ಭದಲ್ಲಿ ದಿನಾಂಕ 25-11-2025 ರಂದು ದುರಂತ ರಸ್ತೆ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು. ಅವರ ಕುಟುಂಬದ ಸಂಕಷ್ಟವನ್ನು ಮನಗಂಡ ರಾಜ್ಯ ಸರ್ಕಾರ, ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1) ರನ್ವಯ ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಗೆ ನೇಮಕಾತಿ ನೀಡಿದೆ.

ಆದೇಶದ ಪ್ರಕಾರ, ನೇಮಕಾತಿ ಎರಡು ವರ್ಷಗಳ ಪರೀಕ್ಷಾರ್ಥಾವಧಿಯೊಂದಿಗೆ ಜಾರಿಯಾಗಿದ್ದು, ಸಹಾಯಕ ಹುದ್ದೆಗೆ ನಿಗದಿಪಡಿಸಿರುವ ವೇತನ ಶ್ರೇಣಿ ರೂ. 49,050 ರಿಂದ ರೂ. 92,500 ಆಗಿರಲಿದೆ.
ನಿಯಮಾವಳಿಗಳಂತೆ, ನೇಮಕಾತಿ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳ ಒಳಗಾಗಿ ಅಭ್ಯರ್ಥಿಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ-1), ಬೆಂಗಳೂರು ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಜೊತೆಗೆ, ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಾವಳಿ 1977ರಂತೆ ಅಗತ್ಯ ನಡತೆ ಪ್ರಮಾಣಪತ್ರಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ದಿವಂಗತ ಅಧಿಕಾರಿ ಕುಟುಂಬಕ್ಕೆ ರಾಜ್ಯ ಸರ್ಕಾರ ನೀಡಿದ ಈ ಮಾನವೀಯ ಸ್ಪಂದನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

